ಶಿವಮೊಗ್ಗ ಕೋರ್ಟ್ಗೆ ಬಾಂಬ್ ಬೆದರಿಕೆ; ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದಿಂದ ಶೋಧ ಕಾರ್ಯ…!!!

ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಬಂದಿರುವ ಮಾಹಿತಿ ಬೆಳಕಿಗೆ ಬಂದಿದ್ದು, ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿ ನ್ಯಾಯಾಲಯ ಆವರಣದಲ್ಲಿ ವ್ಯಾಪಕ ಭದ್ರತಾ ತಪಾಸಣೆ ನಡೆಸಿದೆ.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ (PDJ) ಅಧಿಕೃತ ಇ-ಮೇಲ್ ವಿಳಾಸಕ್ಕೆ ಬಾಂಬ್ ಸ್ಫೋಟದ ಬೆದರಿಕೆ ಸಂದೇಶ ಬಂದಿದ್ದು, ತಕ್ಷಣವೇ ಈ ಕುರಿತು ಜಯನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ.
ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ನ್ಯಾಯಾಲಯದ ಸುತ್ತಮುತ್ತ ಕಟ್ಟೆಚ್ಚರ ವಹಿಸಿ, ಸಂಪೂರ್ಣ ಪ್ರದೇಶವನ್ನು ಭದ್ರತಾ ವಲಯವಾಗಿ ಪರಿವರ್ತಿಸಿದರು. ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದ ನೆರವಿನಿಂದ ನ್ಯಾಯಾಲಯದ ಕಟ್ಟಡ, ವಾಹನ ನಿಲುಗಡೆ ಪ್ರದೇಶ ಸೇರಿದಂತೆ ಆವರಣದ ವಿವಿಧ ಭಾಗಗಳಲ್ಲಿ ಸುದೀರ್ಘ ಪರಿಶೀಲನೆ ನಡೆಸಲಾಯಿತು.
ತಪಾಸಣೆ ವೇಳೆ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಬೆದರಿಕೆ ಇ-ಮೇಲ್ ಕಳುಹಿಸಿದ ವ್ಯಕ್ತಿ ಅಥವಾ ಗುಂಪಿನ ಬಗ್ಗೆ ಮಾಹಿತಿ ಸಂಗ್ರಹಿಸುವ ಕಾರ್ಯ ಮುಂದುವರಿದಿದ್ದು, ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಕೆಲಕಾಲ ನ್ಯಾಯಾಲಯ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಭದ್ರತಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.



