ಲಾರಿ ಅಡ್ಡಗಟ್ಟಿ ದರೋಡೆಗೆ ಯತ್ನ; 24 ಗಂಟೆಯಲ್ಲೇ ಮೂವರು ಆರೋಪಿಗಳ ಬಂಧನ.

ಆನೇಕಲ್: ಸಿನಿಮಾವನ್ನೇ ಹೋಲುವ ರೀತಿಯಲ್ಲಿ ಲಾರಿಯನ್ನು ಅಡ್ಡಗಟ್ಟಿ ದರೋಡೆ ನಡೆಸಲು ಯತ್ನಿಸಿದ್ದ ಮೂವರು ಆರೋಪಿಗಳನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ಉಪವಿಭಾಗದ ಸೂರ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಶರತ್ ಕುಮಾರ್ (23), ರೂಪೇಶ್ (26) ಹಾಗೂ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಮದ್ಯದ ಅಮಲಿನಲ್ಲಿದ್ದ ಆರೋಪಿಗಳು ಸುಲಭವಾಗಿ ಹಣ ಸಂಪಾದಿಸುವ ಉದ್ದೇಶದಿಂದ ದರೋಡೆಗೆ ಸಂಚು ರೂಪಿಸಿದ್ದರು. ಚಂದಾಪುರ–ಆನೇಕಲ್ ಮುಖ್ಯರಸ್ತೆಯ ಮರಸೂರು ಸಮೀಪ ರಾತ್ರಿ ವೇಳೆ ಸಾಗುತ್ತಿದ್ದ ಲಾರಿಯನ್ನು ಅಡ್ಡಗಟ್ಟಿದ ಅವರು, ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ.
ಭಯಗೊಂಡ ಚಾಲಕ ಸ್ಥಳದಿಂದ ಓಡಿ ಹೋಗುತ್ತಿದ್ದಂತೆ ಲಾರಿಯನ್ನು ಕೊಂಡೊಯ್ದ ಆರೋಪಿಗಳು, ಬಳಿಕ ವಾಹನವನ್ನು ಮರಳಿ ನೀಡಲು ಹಣಕ್ಕೆ ಬೇಡಿಕೆ ಇಡುವ ಯೋಜನೆ ರೂಪಿಸಿದ್ದರು ಎನ್ನಲಾಗಿದೆ.
ಲಾರಿಯಲ್ಲಿದ್ದ ಜಿಪಿಎಸ್ ವ್ಯವಸ್ಥೆಯ ಮಾಹಿತಿ ಆರೋಪಿಗಳಿಗೆ ಗೊತ್ತಿದ್ದ ಕಾರಣ, ಅದನ್ನೇ ಹಣ ವಸೂಲಿಗೆ ಬಳಸುವ ಉದ್ದೇಶ ಹೊಂದಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.



